
ಬೆಂಗಳೂರಿನ ಅಶೋಕನಗರದ ಗರುಡಾ ಮಾಲ್ (Garuda Mall) ಬಳಿ ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ (Congress) ಮುಖಂಡರೊಬ್ಬರನ್ನು ಕೊಲೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಅವರು ರಾತ್ರಿ ಲೈವ್ ಬ್ಯಾಂಡ್ ಕಾರ್ಯಕ್ರಮ ಮುಗಿಸಿ ಸ್ನೇಹಿತನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ, ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಬೆಂಗಳೂರಿನ ಅಶೋಕನಗರದಲ್ಲಿ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಕೊಲೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ, ಅಶೋಕನಗರ ಠಾಣೆಯ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ತೆರಳಿದರು. ಅಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೈದರ್ ಅಲಿಯನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಕೊನೆಯುಸಿರೆಳೆದರು.
ಈ ವಿಷಯ ತಿಳಿದು ಹೈದರ್ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿದರು. ಕೋಪಗೊಂಡ ಬೆಂಬಲಿಗರು ಲಾಂಗು, ಮಚ್ಚುಗಳಂತಹ ಮಾರಕಾಸ್ತ್ರಗಳನ್ನು ಹಿಡಿದು ಆಸ್ಪತ್ರೆಯ ಬಳಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನ, ಅಶೋಕನಗರ ಠಾಣೆಯ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಅಶೋಕನಗರ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಕೊಲೆ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಹೈದರ್ ಅಲಿ ಅವರ ಜೊತೆಗಿದ್ದ ಸ್ನೇಹಿತನಿಗೂ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೈದರ್ ಅಲಿ ವಿರುದ್ದ 11 ಕೇಸ್: DCP
ಹೈದರ್ ಅಲಿ ಅಶೋಕನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ. ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ 11 ಪ್ರಕರಣಗಳು ದಾಖಲಾಗಿದ್ದವು. ಮಾರಣಾಂತಿಕ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಅವನು ಭಾಗಿಯಾಗಿದ್ದನು. ಹೈದರ್ ಅಲಿ 2014 ರಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು. 2022 ರಿಂದ ಯಾವುದೇ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿರಲಿಲ್ಲ. ಆದರೆ, ತನ್ನ ಏರಿಯಾದಲ್ಲಿ ತನ್ನ ಪ್ರಭಾವವನ್ನು ಮುಂದುವರಿಸಿದ್ದನು.
ಆನೆಪಾಳ್ಯದ ನಿವಾಸಿಯಾಗಿದ್ದ ಹೈದರ್ ಅಲಿ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರೊಂದಿಗೆ ಗುರುತಿಸಿಕೊಂಡಿದ್ದರು. ಅವರು ಚುನಾವಣೆ ಸಂದರ್ಭದಲ್ಲಿ ಎನ್.ಎ. ಹ್ಯಾರಿಸ್ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ. ಶೇಖರ್ ಅವರು ಮಾತನಾಡಿದಂತೆ, ಮಧ್ಯರಾತ್ರಿ 1.30ರ ಸಮಯದಲ್ಲಿ ಹೈದರ್ ಅಲಿ ಕೊಲೆಗೈಯಲಾಗಿದೆ. ಹೈದರ್ ಅಲಿ ಅವರ ಕೊಲೆ ಆಗುವ ವೇಳೆ, ಅವರು ಆನೆಪಾಳ್ಯದ ಮನೆಗೆ ಹೋಗುತ್ತಿದ್ದಾಗ ಕಾರು ಅಡ್ಡಗಟ್ಟಿ ಕೊಲೆ ಮಾಡಲಾಗಿದೆ.
ಹೈದರ್ ಅಲಿ ರಾಜಕೀಯ ನಾಯಕನಲ್ಲ. ಅವನ ಅಣ್ಣ ಸಾಮಾಜಿಕ ಕಾರ್ಯಕರ್ತ ಎಂದು ಡಿಸಿಪಿ ಹೇಳಿದರು.
ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ FBI ನಿರ್ದೇಶಕ ಕಶ್ಯಪ್ ಪಟೇಲ್