
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಕಾಂಗ್ರೆಸ್ನಲ್ಲಿ “ಟ್ರಬಲ್ ಶೂಟರ್” ಎಂದು ಪ್ರಸಿದ್ಧರಾಗಿದ್ದಾರೆ. ಅವರು ಸಂಘಟನಾ ಚತುರರೂ ಹೌದು. ಕೆಪಿಸಿಸಿ ಅಧ್ಯಕ್ಷರಾದಾಗಿನಿಂದ ಉಪಮುಖ್ಯಮಂತ್ರಿಯಾದವರೆಗೂ ಸಂಘಟನೆಯನ್ನೇ ಪ್ರಮುಖ ಕಾರ್ಯಸೂಚಿಯನ್ನಾಗಿ ಇಟ್ಟುಕೊಂಡು ಮುನ್ನಡೆಯುತ್ತಿದ್ದಾರೆ. ಅಷ್ಟೇ ಅಲ್ಲ, ಅವರು ತಮ್ಮದೇ ಶೈಲಿಯಲ್ಲಿ ಹಿಂದುತ್ವದ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಈ ಹಿಂದುತ್ವವು ಬಿಜೆಪಿಯವರ ನಿದ್ದೆಗೆಡಿಸಿತ್ತು. ಇದರಿಂದಾಗಿ, ಬಿಜೆಪಿ ಅವರು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದರು, ಮತ್ತು ದೆಹಲಿಯ ಕಾಂಗ್ರೆಸ್ ನಾಯಕರ ಮುಂದೆಯೂ ಟೀಕೆಗಳ ಸುರಿಮಳೆಗೈದರು. ಆದರೂ, ಡಿ.ಕೆ.ಶಿವಕುಮಾರ್ ಅವರು ತಮ್ಮ ಹಿಂದುತ್ವದ ನಿಲುವಿನ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಬಿಜೆಪಿಯವರ ಬಾಯಿ ಮುಚ್ಚಿಸಿದರು.
ಇದನ್ನೂ ಓದಿ: 21 ದೇವಾಲಯಗಳ ಒಂದು ಟನ್ ಚಿನ್ನ ಕರಗಿಸಿದ ಸರ್ಕಾರ
ಡಿ.ಕೆ.ಶಿವಕುಮಾರ್ ಅವರ ಹಿಂದುತ್ವದ ನಿಲುವು ಈಗಲೂ ವಿಭಿನ್ನವಾಗಿ ಚರ್ಚೆಯಲ್ಲಿದೆ. ಅವರ ಹಿಂದುತ್ವದ ಹಿಂದಿನ ಉದ್ದೇಶ ಕೇವಲ ಸಂಘಟನೆ ಮಾತ್ರವಲ್ಲ, ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ಕರಾವಳಿ ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ರಾಜಕೀಯ ತಂತ್ರವೂ ಅಡಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಕರ್ನಾಟಕದ ಕರಾವಳಿ ಪ್ರದೇಶವು ಬಿಜೆಪಿಯ ಭದ್ರಕೋಟೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 2 ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದ 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳೂ ಸಹ ಬಿಜೆಪಿಯ ವಶದಲ್ಲಿವೆ. ಲೋಕಸಭಾ ಚುನಾವಣೆಯಲ್ಲಿಯೂ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ.
ಇಂತಹ ಸಂದರ್ಭದಲ್ಲಿಯೂ ಕಾಂಗ್ರೆಸ್ನ ಪ್ರಭಾವಿ ನಾಯಕ, ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎದೆಗುಂದದೆ, ಬಿಜೆಪಿಯ ಭದ್ರಕೋಟೆಯನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಪಣತೊಟ್ಟಿದ್ದಾರೆ. ಅವರು ತಮ್ಮ “ಮೃದು ಹಿಂದುತ್ವ”ದ ಮೂಲಕ ಕರಾವಳಿಯನ್ನು ಮರು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು “ಮೃದು ಹಿಂದುತ್ವ”ದ ಮೂಲಕ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಲು ಕಾರ್ಯತಂತ್ರ ರೂಪಿಸಿದ್ದಾರೆ. ಅವರು ಕರಾವಳಿಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ, ಕಂಬಳ ಮತ್ತು ಬ್ರಹ್ಮಕಲಶೋತ್ಸವಗಳಂತಹ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಕ್ಷವನ್ನು ಬಲಪಡಿಸಲು ಅವರು ವಿಶೇಷ ಗಮನ ಹರಿಸುತ್ತಿದ್ದಾರೆ.
ಕಾಂಗ್ರೆಸ್ ನಾಯಕರು ಆಯೋಜಿಸುವ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಅವರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರಿಗೆ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಗುರುಪುರ ಕಂಬಳದ ನಂತರ ಡಿ.ಕೆ.ಶಿವಕುಮಾರ್ ಅವರು ಮತ್ತೆ ಕರಾವಳಿಗೆ ಭೇಟಿ ನೀಡುತ್ತಿದ್ದಾರೆ. ಮೊದಲು ಅವರು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 20 ರಂದು ಬೆಳ್ತಂಗಡಿಯಲ್ಲಿ ನಡೆಯುವ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷದ ಬಲ ಕಡಿಮೆ ಇದ್ದರೂ, ಡಿ.ಕೆ.ಶಿವಕುಮಾರ್ ಅವರು ಪದೇ ಪದೇ ಆ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಂತಲೂ ಹೆಚ್ಚಾಗಿ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.